ವಿಟ್ಲ: ಪುಣಚ ಗ್ರಾಮ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ವತಿಯಿಂದ ಜ.20 ರಂದು ಸಂಜೆ ಪುಣಚ ಗ್ರಾಮದ ಅಜ್ಜಿನಡ್ಕದಲ್ಲಿ ಜನಪರ ರಾಜಕೀಯ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಸೇರಿದಂತೆ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಶಾಕೀರ್ ಅಳಕೆಮಜಲು ತಿಳಿಸಿದರು.
ಅವರು ವಿಟ್ಲದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆ ಹಾಗೂ ತಳಮಟ್ಟದಲ್ಲಿ ಪಕ್ಷ ಸಂಘಟಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಇದುವರೆಗೂ ಆಡಳಿತ ನಡೆಸಿರುವ ಯಾವುದೇ ರಾಜಕೀಯ ಪಕ್ಷಗಳು ಹಾಗೂ ಸರಕಾರಗಳು ಇಲ್ಲಿಯ ಅಲ್ಪಸಂಖ್ಯಾತರಿಗೆ, ದಲಿತರಿಗೆ, ಶೋಷಿತರಿಗೆ ನಿರಂತರ ಅನ್ಯಾಯ ಮಾಡುತ್ತಾ ಬಂದಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದೇ ಸ್ವಾರ್ಥ ರಾಜಕೀಯ ಮಾಡುತ್ತಿದೆ. ಎಸ್ಡಿಪಿಐ ಪಕ್ಷಗಳು ನಿರಂತರವಾಗಿ ಬಡವರ ಶೋಷಿತರ ಧ್ವನಿಯಾಗಿ ಹೋರಾಟ ನಡೆಸುತ್ತಾ ಬಂದಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ, ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ, ದ.ಕ ಜಿಲ್ಲಾಧ್ಯಕ್ಷ ಅತ್ತಾವುಲ್ಲ ಜೋಕಟ್ಟೆ, ಕಾರ್ಯದರ್ಶಿ ಅಶ್ರಫ್ ಮಂಚಿ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಬೂಕ್ಕರ್ ಸಿದ್ದೀಕ್, ಜಿಲ್ಲಾ ಸಮಿತಿ ಸದಸ್ಯ ಆನಂದ ಮಿತ್ತಬೈಲು, ಜಾಬಿರ್ ಅರಿಯಡ್ಕ, ಕಲಂದರ್ ಪರ್ತಿಪ್ಪಾಡಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್ಡಿಪಿಐ ಪುಣಚ ಗ್ರಾಮ ಸಮಿತಿ ಅಧ್ಯಕ್ಷ ಇಬ್ರಾಹಿಂ ಕರೀಂ, ಸದಸ್ಯರಾದ ಶಾಫಿ ಪುಣಚ, ವಿಟ್ಲ ವಲಯಾಧ್ಯಕ್ಷ ರಹೀಂ ಕುಂಡಡ್ಕ ಉಪಸ್ಥಿತರಿದ್ದರು.