


ಬಂಟ್ವಾಳ: ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಶಿಥಿಲಾವಸ್ಥೆಗೆ ತಲುಪಿದ್ದ ದೇವರಾಜು ಅರಸು ಬಾಲಕರ ಹಾಸ್ಟೆಲ್ ಕಟ್ಟಡ ಕುಸಿದು ಬಿದ್ದಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿದ್ದು, ಬಂಗ್ಲೆಗುಡ್ಡೆಯ ಪುರಸಭಾ ಕಟ್ಟಡದಲ್ಲಿ ಬಾಡಿಗೆ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಈ ಬಾಲಕರ ಹಾಸ್ಟೆಲ್ ಕಟ್ಟಡ ಕಳೆದ ಕೆಲವು ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದು, ಕುಸಿಯುವ ಭೀತಿ ಎದುರಿಸುತ್ತಿತ್ತು.
ಇತ್ತೀಚೆಗೆ ತೀವ್ರ ನಾದುರಸ್ಥಿಗೆ ತಲುಪಿದ ಕಟ್ಟಡದಲ್ಲಿ ವಿದ್ಯಾರ್ಥಿಗಳ ವಾಸ ಅಪಾಯಕಾರಿ ಎಂದರಿತು ಜುಲಾಯಿಂದ ಇಲ್ಲಿನ ವಿದ್ಯಾರ್ಥಿಗಳನ್ನು ಮೊಗರ್ನಾಡುವಿನ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು.
ಈ ಬಗ್ಗೆ ಸ್ಥಳೀಯರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಹಾಸ್ಟೆಲ್ಗೆ ಭೇಟಿ ನೀಡಿ, ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಗೂ ಹಾಸ್ಟೆಲ್ ವಾರ್ಡನ್ಗಳಿಂದ ಮಾಹಿತಿ ಪಡೆದುಕೊಂಡಿದ್ದರು.
ಪಾಣೆಮಂಗಳೂರಿನ ಬಂಗ್ಲೆಗುಡ್ಡೆಯ ಪುರಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ವಸತಿ ನಿಲಯ 120 ವರ್ಷಕ್ಕೂ ಹಳೆದಾಗಿದೆ. ಕಳೆದ ಕೆಲವು ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದ ಬಗ್ಗೆ ಮಾಧ್ಯಮಗಳಲ್ಲಿಯೂ ವರದಿಗಳಾಗಿತ್ತು. ಈ ಕಟ್ಟಡ ಬಂಟ್ವಾಳ ಪುರಸಭೆಯ ಅಧೀನದಲ್ಲಿ ಕಾರ್ಯಾಚರಿಸುತ್ತಿದ್ದು, ಹಳೆ ಹಾಸ್ಟೆಲ್ ಪಕ್ಕದಲ್ಲಿಯೇ ಇಲ್ಲಿನ ಬಾಲಕರಿಗಾಗಿ ನಿರ್ಮಿಸಿದ ಹೊಸ ಕಟ್ಟಡದಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರಿಗೆ ವಸತಿ ವ್ಯವಸ್ಥೆ ಮಾಡಿದ್ದು, ಇದರಿಂದ ಇಲ್ಲಿರುವ ೩೫ ಬಾಲಕರನ್ನು ಹಳೆ ಕಟ್ಟಡದಲ್ಲಿಯೇ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಹಳೆ ಕಟ್ಟಡವು ಮತ್ತಷ್ಟು ಶಿಥಿಲಗೊಂಡಿದ್ದು, ಘಟನೆಯ ಬಳಿಕ ಮಕ್ಕಳಿಗೆ ಇಲಾಖೆಯು ಈಗಾಗಲೇ ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸುವ ಮೂಲಕ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿದೆ ಎಂದು ಹೇಳಿದ್ದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಕಟ್ಟಡ ನಿರ್ಮಿಸಲು ಸರಕಾರಕ್ಕೆ ಸಲ್ಲಿಕೆಯಾಗಿರುವ ಹಾಗೂ ಬಾಲಕಿಯರಿಗಾಗಿ ಕಾಮಾಜೆಯಲ್ಲಿ ನಿಗದಿಯಾಗಿರುವ ಸ್ಥಳದಪ್ರಸ್ತಾವದ ಬಗ್ಗೆ ದೂರವಾಣಿ ಕರೆ ಮೂಲಕ ಆಯುಕ್ತರೊಂದಿಗೆ ಚರ್ಚಿಸಿದ ಶಾಸಕರು, ಈ ಪ್ರಸ್ತಾವಕ್ಕೆ ಆಯುಕ್ತರಿಂದ ಮಂಜೂರಾತಿ ಪಡೆದುಕೊಳ್ಳುಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದರು.
ಅದರೆ ಈ ಕಟ್ಟಡ ಬಿದ್ದು ನಷ್ಟ ಸಂಭವಿಸುವ ಮೊದಲು ಎಚ್ಚೆತ್ತುಕೊಂಡು ಸಂಬಂಧಿಸಿದ ಇಲಾಖೆ ಕಟ್ಟಡದ ಹಂಚು ಹಾಗೂ ಇತರ ಸಲಕರಣೆಗಳ ರಕ್ಷಣೆ ಮಾಡುವ ಕೆಲಸ ಮಾಡದೆ ನಿರ್ಲಕ್ಷ ತೋರಿದೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.





