ವಿಟ್ಲ: ಕೊಳ್ನಾಡು ಸಾಲೆತ್ತೂರು ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಕೇಂದ್ರ ಸರಕಾರ ಜಾರಿಗೆ ತಂದಿರುವ ಸಂವಿಧಾನ ವಿರೋಧಿ ಎನ್ಆರ್ಸಿ, ಸಿಎಎ, ಎನ್ಪಿಆರ್ ಅನ್ನು ಖಂಡಿಸಿ ಪ್ರತಿಭಟನಾ ಸಮಾವೇಶ ಫೆ.16 ರಂದು ಮಧ್ಯಾಹ್ನ ಸಾಲೆತ್ತೂರಿನಲ್ಲಿ ನಡೆಯಲಿದೆ ಎಂದು ಕೊಳ್ನಾಡು ಸಾಲೆತ್ತೂರು ಸಂವಿಧಾನ ಸಂರಕ್ಷಣಾ ಸಮಿತಿಯ ಸಂಚಾಲಕ ಎಂ.ಎಸ್ ಮಹಮ್ಮದ್ ತಿಳಿಸಿದರು.
ಅವರು ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರಕಾರ ಜನ ವಿರೋಧಿ ಕಾಯ್ದೆಯನ್ನು ಜಾರಿಗೊಳಿಸುವುದರ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ. ಪೌರತ್ವ ಸಾಬೀತುಪಡಿಸಲು ಸರಕಾರವೇ ಜಾರಿಗೆ ತಂದಿರುವ ಆಧಾರ್, ಪಾಸ್ಪೋರ್ಟ್ ದಾಖಲೆ ಸರಿಯಾದ ದಾಖಲೆ ಅಲ್ಲ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಕಳೆದ ಹಲವಾರು ತಿಂಗಳುಗಳಿಂದ ಇದರ ವಿರುದ್ಧ ಹೋರಾಟ ನಡೆಸಲಾಗುತ್ತಿದೆ. ಆದರೆ ಸರಕಾರ ಈ ಬಗ್ಗೆ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾಲೆತ್ತೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ೫ ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದರು.
ಪ್ರತಿಭಟನೆಯಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ಮೈಸೂರು, ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್, ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಆರ್ ಭಾಸ್ಕರ್ ಪ್ರಸಾದ್, ಸಾಲೆತ್ತೂರು ಚರ್ಚ್ನ ಧರ್ಮಗುರು ಹೆನ್ರಿ ಡಿಸೋಜ, ಹಾಜಿ ಅಬ್ದುಲ್ ಖಾದರ್ ಉಸ್ತಾದ್ ಬಂಬ್ರಾಣ, ಹಾಫಿಲ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ, ಮಾಜಿ ಸಚಿವ ಬಿ. ರಮಾನಾಥ ರೈ, ಖ್ಯಾತ ಭಾಷಣಗಾರ ಅಬ್ದುಲ್ ಮಜೀದ್ ಕೊಡ್ಲಿಪೇಟೆ, ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಬಾಪಕುಂಞ, ಹನೀಫ್ ಖಾನ್ ಕೊಡಾಜೆ, ಬಿ.ಕೆ ಸೇಸಪ್ಪ ಬೆದ್ರಕಾಡು, ಅಬ್ಬಾಸ್ ಅಲಿ ಸೇರಿದಂತೆ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕರಾದ ಎ.ಬಿ ಅಬ್ದುಲ್ಲ, ಅಶ್ರಫ್ ಸಾಲೆತ್ತೂರು, ಪಿ.ಎಂ ಹಕೀಂ ಪರ್ತಿಪ್ಪಾಡಿ, ಕಲಂದರ್ ಪರ್ತಿಪ್ಪಾಡಿ ಉಪಸ್ಥಿತರಿದ್ದರು.