ನವದೆಹಲಿ: ಹೊಸ ಶಿಕ್ಷಣ ನೀತಿಯಲ್ಲಿ ಯಾವುದೇ ಭೇದ, ಭಾವ ಇಲ್ಲ. ಪ್ರತಿಯೊಂದು ದೇಶವು ತನ್ನ ಶಿಕ್ಷಣ ನೀತಿಯೊಂದಿಗೆ ಬೆಳೆಯುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ನವಭಾರತದ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶಿಕ್ಷಣ ಸಚಿವಾಲಯ ಆಯೋಜಿಸಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ್ದಾರೆ. ಮೂರು – ನಾಲ್ಕು ವರ್ಷಗಳ ಸುದೀರ್ಘ ಚರ್ಚೆ ನಂತರ ಹೊಸ ಶಿಕ್ಷಣ ನೀತಿಯನ್ನು ಅಂಗೀಕರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದಲ್ಲಿ ಉನ್ನತ ಶಿಕ್ಷಣದಲ್ಲಿ ಸುಧಾರಣೆಯಾಗಲಿದೆ. ವಿದ್ಯಾರ್ಥಿಗಳು ಸಂಶೋಧನೆಯತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಯಾರು ಸಣ್ಣವರು, ದೊಡ್ಡವರು ಎಂಬುದಿಲ್ಲ. ದೇಶದ ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ಕಲ್ಪಿಸಿಕೊಡಲಾಗಿದೆ ಎಂದರು. ದೇಶಕ್ಕೆ ಉತ್ತಮ ವಿದ್ಯಾರ್ಥಿಗಳು, ಕೌಶಲ್ಯವುಳ್ಳವರು, ಉತ್ತಮ ವ್ಯಕ್ತಿಗಳನ್ನು ಕೊಡುವ ಸಾಮರ್ಥ್ಯ ಶಿಕ್ಷಕರಿಗೆ ಇದೆ. ಹೀಗಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಬಹಳ ದೊಡ್ಡ ಬದಲಾವಣೆ ತರಲಿದೆ ಎಂದು ಹೇಳಿದ್ದಾರೆ.
ಈ ಕ್ರಾಂತಿಕಾರಕ ಶಿಕ್ಷಣ ಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಲಿದ್ದು, ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಎಂದರು. ಪುಸ್ತಕಗಳ ಹೊರೆ ಕಡಿಮೆ ಮಾಡಿರುವ ಈ ಯೋಜನೆಯು ವಿದ್ಯಾರ್ಥಿಗಳ ಆಸಕ್ತಿ ಆಧಾರ ಮೇಲೆ ಕಲಿಕೆಯ ಸ್ವಾತಂತ್ರ್ಯವನ್ನು ನೀಡಲಾಗಿರುವುದು ವಿಶೇಷ ಎಂದರು. ಉತ್ತಮ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದಿಂದ ವಿಶೇಷ ಗೌರವ ಸಿಗಲಿದೆ. ಹೊಸ ಶಿಕ್ಷಣ ನೀತಿಯಲ್ಲಿ ಪುಸ್ತಕದ ಹೊರೆ ಕಡಿಮೆಯಾಗಲಿದೆ. ಸದ್ಯ ಓದುತ್ತಿರುವ ಕಲಿಕೆ ಬಗ್ಗೆ ಆಸಕ್ತಿ ಇಲ್ಲದಿದ್ದರೆ, ಬೇರೆ ಕೋರ್ಸ್ ಆಯ್ಕೆ ಮಾಡಿಕೊಳ್ಳಲು ಮುಕ್ತ ಅವಕಾಶ ಇದೆ ಎಂದು ತಿಳಿಸಿದ್ದಾರೆ.