ಕಾಸರಗೋಡು: ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ ನಿನ್ನೆ (ಶನಿವಾರ) ಮಧ್ಯರಾತ್ರಿ ಸುಮಾರು 12.45 ಕ್ಕೆ ದೈವಾದೀನರಾಗಿದ್ದಾರೆ.
ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಕೇಶವಾನಂದ ಸ್ವಾಮೀಜಿಯವರ ಹೆಸರು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ಭಾರತದಲ್ಲೇ ಸಂಚಲನ ಉಂಟು ಮಾಡಿದ್ದ ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿತ್ತು.