ಬಂಟ್ವಾಳ : ಎಲ್ಲರ ಆರೋಗ್ಯದ ಹಿತ ದೃಷ್ಟಿಯಲ್ಲಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಜನರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಪೋಷಣ್ ಪಾಕ್ಷಿಕದ ಅಂಗವಾಗಿ ಆರಂಭಿಸಲಾದ ಪೋಷಣ್ ಪಕ್ವಾಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗೆ ಚಿಕ್ಕವಯಸ್ಸಿನಿಂದಲೇ ಉತ್ತಮ ಪೌಷ್ಠಿಕ ಆಹಾರ ಒದಗಿಸುವ ಮೂಲಕ ಮುಂದಿನ ಹಂತದಲ್ಲಿ ಮಕ್ಕಳು ತನ್ನ ಆರೋಗ್ಯದ ಬಗ್ಗೆ ಸ್ವಯಂಕಾಳಜಿ ವಹಿಸುವಂತಾಗಲಿ ಎಂದವರು ಆಶಿಸಿದರು.
ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿ, ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿದಾಗ ಮಾತ್ರ ಪ್ರತಿಯೊಬ್ಬರೂ ಆರೋಗ್ಯದಿಂದ ಇರಲು ಸಾಧ್ಯ ಎಂದರು.
ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಬಂಟ್ವಾಳ ರೋಟರಿ ಅಧ್ಯಕ್ಷ ನಾರಾಯಣ ಹೆಗ್ಡೆ, ರೋಟರಿ ಆ್ಯನ್ಸ್ ಅಧ್ಯಕ್ಷೆ ರೊ.ಪ್ರತಿಭಾ ರೈ , ರೊ. ವಾಣಿ ಕಾರಂತ್ ವೇದಿಕೆಯಲ್ಲಿದ್ದರು. ಇದೇ ಸಂದರ್ಭ ಪೋಷಣ್ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿಕಂಬಳಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಮೇಲ್ವಿಚಾರಕಿ ಸಿಂಧೂ ಕಾರ್ಯಕ್ರಮ ನಿರ್ವಹಿಸಿದರು.ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾವತಿ ವಂದಿಸಿದರು.