ಬಂಟ್ವಾಳ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ನಾಳೆ ನಡೆಯುವ ಮೊದಲ ಹಂತದ ಚುನಾವಣೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಡೀ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರ ಸೇರಿದಂತೆ ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಮೈಸೂರು-ಕೊಡಗು, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಮೊದಲ ಹಂತದ ಚುನಾವಣಾ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆಯೇ ಅಭ್ಯರ್ಥಿಗಳು ಮತ ಬೇಟೆಗಾಗಿ ಈಗ ಮನೆ ಮನೆಗೆ ಭೇಟಿ ನೀಡುತ್ತಿದ್ದು, ನಾಯಕರುಗಳು ಈಗ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಧಾವಿಸಿದ್ದಾರೆ. ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಏಪ್ರಿಲ್ 23 ರ ಮಂಗಳವಾರದಂದು ಮತದಾನ ನಡೆಯಲಿದ್ದು, ಕ್ಷೇತ್ರಗಳ ವಿವರ ಇಂತಿದೆ.
ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 23 ರಂದು ಮತದಾನ ನಡೆಯಲಿದೆ.