ಮಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿಗೆ ಭೇಟಿ ನೀಡಿದ ಅವರು ವಿಮಾನ ನಿಲ್ದಾಣದಲ್ಲಿ ಮಾತನಾಡಿದದರು. ಸಿಐಡಿ ಇಲಾಖೆಯಲ್ಲಿ ಕೆಲಸ ಮಾಡುವವರು ಪೊಲೀಸರೇ. ಫೈರಿಂಗ್ ಕೂಡ ಮಾಡಿದ್ದು ಪೊಲೀಸರೇ. ಈಗ ಪ್ರಕರಣವನ್ನು ಪೊಲೀಸರಿಂದಲೇ ತನಿಖೆ ಮಾಡಿಸುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು. ಅಲ್ಲದೆ, ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಈ ಬಗ್ಗೆ ಹಿಂದೆಯೂ ಒತ್ತಾಯಿಸಿದ್ದೇವೆ. ಮುಂದೆಯೂ ಒತ್ತಾಯಿಸುತ್ತೇನೆ. ಅಸೆಂಬ್ಲಿಯಲ್ಲೂ ಈ ಬಗ್ಗೆ ಆಗ್ರಹಿಸುತ್ತೇನೆ ಎಂದರು.ಮುಖ್ಯಮಂತ್ರಿ ಯಡಿಯೂರಪ್ಪನವರು ಸುಳ್ಳು ಹೇಳುತ್ತಾರೆ. ಅವರಿಗೆ ಸತ್ಯ ಹೇಳಲು ಗೊತ್ತಿಲ್ಲ. ಅವರು ಪೊಲೀಸನವರಿಗೆ ಸರ್ಟಿಫಿಕೇಟ್ ನೀಡುತ್ತಾರೆ. ಅವರು ಪ್ರಮುಖ ಸಾಕ್ಷಿನಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇಲ್ಲಿನ ವಿಚಾರದಲ್ಲಿ ಅವರು ಸರ್ಕಾರದ ರಿಮೋಟ್ ಕಂಟ್ರೋಲ್ ಆಗಿದ್ದಾರೆ. ಅವರು ಕೂಡ ಪ್ರಚೋದನಕಾರಿ ಹೇಳಿಕೆ ನೀಡುತ್ತಾರೆ. ಅವರ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.