ಬೆಂಗಳೂರು: ಸರ್ಕಾರ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮದಿಂದಾಗಿ ರಾಜ್ಯದಲ್ಲಿ ಈವರೆಗೆ ಯಾವುದೇ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಇದುವರೆಗೂ ರಾಜ್ಯದಲ್ಲಿ ಎಲ್ಲಿಯೂ ಕೊರೊನಾ ವೈರಸ್ ಬಗ್ಗೆ ಪತ್ತೆಯಾಗಿಲ್ಲ. ಶಂಕಿತ ಪ್ರಕರಣಗಳ ಎಲ್ಲಾ ರಿಪೋರ್ಟ್ ಗಳಲ್ಲೂ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಮಾಹಿತಿ ನೀಡಿದರು. ರಾಜ್ಯ ಸರ್ಕಾರ ಟಾಸ್ಕ್ ಪೋರ್ಸ್ ರಚಿಸಿ ಕೊರೊನಾ ಪ್ರಕರಣಗಳ ಕುರಿತು ತೀವ್ರ ನಿಗಾ ಇರಿಸಲಾಗಿದೆ. ಸರ್ಕಾರ ಈ ಬಗ್ಗೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಈಗಾಗಲೇ 72,542 ಜನರನ್ನು ತಪಾಸಣೆ ಮಾಡಲಾಗಿದೆ. ಕಳೆದ ಎರಡು ದಿನಗಳಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 49,594 ಪ್ರಯಾಣಿಕರ ತಪಾಸಣೆ ನಡೆಸಲಾಗಿದೆ ಎಂದು ಹೇಳಿ ಕೊರೊನಾ ಪತ್ತೆಗಾಗಿ ಹೊಸ ಯಂತ್ರಗಳನ್ನು ಜಿಲ್ಲಾ ಕೇಂದ್ರಗಳಿಗೆ ಕಳುಹಿಸಿಕೊಡಲಾಗುವುದು ಎಂದರು.