ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಆಸ್ಪತ್ರೆ ಹಾಗೂ ಸಂಶೋಧನಾ ಸಂಘ (ನಿ) ಮಂಗಳೂರು, ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಹಾಗು ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರ ಸಂಘ(ನಿ) ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ವಿಘ್ನೇಶ್ ಬಿಲ್ಡಿಂಗ್ ನಲ್ಲಿ ರಕ್ತದಾನ ಶಿಬಿರ ಜರುಗಿತು.
ಕೊರೋನಾ ವೈರಸ್ ನಿಂದಾಗಿ ಜಿಲ್ಲೆಯ ಬ್ಲಡ್ ಬ್ಯಾಂಕುಗಳಲ್ಲಿ ರಕ್ತದ ಕೊರತೆ ಇರುವುದನ್ನು ಮನಗಂಡು ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷ ಹರಿದಾಸ್ ಎಸ್. ಎಂ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಬಳಿಕ ಮಾತನಾಡಿದ ಅವರು ರಕ್ತದಾನಕ್ಕಿಂತ ಮಿಗಿಲಾದ ದಾನ ಇನ್ನೊಂದಿಲ್ಲ. ಒಂದು ಜೀವವನ್ನು ಉಳಿಸುವ ಮಹಾನ್ ಕಾರ್ಯ ರಕ್ತದಾನದ ಮೂಲಕ ಆಗುತ್ತದೆ. ಯುವಜನರು ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಮಾಡಲು ಮುಂದಾಗಬೇಕಾಗಿದೆ ಎಂದರು.
ಕಾಯಿಲೆಗೆ ಒಳಗಾದ ಸಂದರ್ಭದಲ್ಲಿ ರಕ್ತಕ್ಕಾಗಿ ಪರದಾಡುವ ಪರಿಸ್ಥಿತಿ ಜಿಲ್ಲೆಯಲ್ಲಿ ಉದ್ಭವಿಸಬಾರದು ಎಂಬ ಉದ್ದೇಶದಿಂದ ವರ್ಷಕ್ಕೆ ಮೂರು ಬಾರಿ ರಕ್ತದಾನ ಆಯೋಜಿಸಲಾಗುತ್ತಿದೆ ಎಂದು ರಕ್ತದಾನದ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಆಸ್ಪತ್ರೆ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಸಂಘದ ಉಪಾಧ್ಯಕ್ಷ ವೆಂಕಟೇಶ್ ಮಯ್ಯ , ನಿರ್ದೇಶಕರುಗಳಾದ ಶಿವಕುಮಾರ್ ಎಸ್.ಎಂ , ಸುಕನ್ಯಾ ಹೆಚ್ , ಶೇಖರ್ ಎಲ್ , ರೆಡ್ ಕ್ರಾಸ್ ಸಂಸ್ಥೆಯ ಸಂಯೋಜಕ ಪ್ರವೀಣ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿಬಿರದಲ್ಲಿ 60 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.