ಬೆಂಗಳೂರು: ಕೊರೋನ ಎರಡನೇ ಅಲೆ ರಾಜ್ಯದಲ್ಲಿ ಅಬ್ಬರ ಉಂಟುಮಾಡಿದ್ದು ಗುರುವಾರ ಒಂದೇ ದಿನ ಸೋಂಕಿತರ ಸಂಖ್ಯೆ 15 ಸಾವಿರಕ್ಕೆ ಏರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಬೆಳಗ್ಗೆ ತನ್ನ ನಿವಾಸದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಸಹಿತ ಹಿರಿಯ ಅಧಿಕಾರಿಗಳು, ಪ್ರಮುಖ ಸಚಿವರ ತುರ್ತು ಸಭೆ ನಡೆಸಿದರು.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಕೊರೋನ ನಿಯಂತ್ರದ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ್ದು ತಜ್ಞರು ಈ ಬಗ್ಗೆ ಸಲಹೆ ನೀಡಿದ್ದಾರೆ. ಸಧ್ಯಕ್ಕೆ ರಾಜ್ಯದಲ್ಲಿ ಈಗಿರುವ ನಿಯಮಗಳು ಮುಂದುವರಿಯಲಿದೆ. ರಾತ್ರಿ ಕರ್ಫ್ಯೂ ರಾಜಾದ್ಯಂತ ವಿಸ್ತರಿಸುವ ಬಗ್ಗೆ ಇನ್ನೆರಡು ದಿನಗಳಲ್ಲಿ ತೀರ್ಮಾನಿಸಲಾಗುವುದು.
ಕೊರೋನ ಪರಿಸ್ಥಿತಿಯನ್ನು ಬೇರೆ ರಾಜ್ಯಕ್ಕೆ ನಮ್ಮ ರಾಜ್ಯವನ್ನು ಹೋಲಿಸಬೇಡಿ. ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ಬೇರೆಯೇ ಇದೆ. ಕೊರೋನ ನಿಯಂತ್ರಣದ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಕೊರೋನ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಈ ವಾರದ ಬಳಿಕ ಇತರ ತೀರ್ಮಾಣಗಳ ಬಗ್ಗೆ ಕ್ರಮ ತೆಗೆಯಲಾಗುವುದು ಎಂದು ತಿಳಿಸಿದ್ದಾರೆ.