


ಬಂಟ್ವಾಳ : ಜನಜಾಗೃತಿಯ ಮೂಲಕ ಸಾಮಾಜಿಕ ವ್ಯವಸ್ಥೆಯಲ್ಲಿ ಪರಿವರ್ತನೆ ತರಲು ಸಾಧ್ಯವಿದೆ, ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಂಟ್ವಾಳ ಯೋಜನಾಧಿಕಾರಿ ಜಯಾನಂದ್ ಹೇಳಿದರು.
ವಗ್ಗದ ಪಚ್ಚಾಜೆ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಹಿಳಾ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ ಜ್ಞಾನವಿಕಾಸ ಕಾರ್ಯಕ್ರಮ ದ ಅಂಗವಾಗಿ ಬುಧವಾರ ಆಯೋಜಿಸಿದ್ದ ಜನಜಾಗೃತಿ ಬೀದಿನಾಟಕ ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೊರೋನಾ ಮಹಾಮಾರಿ ಎಲ್ಲಾ ಸಾಮಾಜಿಕ ಕೆಲಸಗಳಿಗೆ ಅಡ್ಡಿ ಉಂಟು ಮಾಡಿದ್ದು, ಮಾನಸಿಕವಾಗಿ ತಲ್ಲಣಗಳನ್ನು ಉಂಟುಮಾಡಿದೆ, ಈ ನಿಟ್ಟಿನಲ್ಲಿ ಜನಜಾಗೃತಿಯ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.
ಕಾರಿಂಜೇಶ್ವರ ದೇವಸ್ಥಾನ ದ ಮಾಜಿ ಆಡಳಿತ ಮೊಕ್ತೇಸರರಾದ ಪಾಚ್ಚಾಜೆ ಗುತ್ತು ಜಿನರಾಜ ಅರಿಗರವರು ದೀಪಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷೆ ರಜನಿ, ಸಂಸಾರ ತಂಡದ ನಿರ್ದೇಶಕ ಮೌನೇಶ ವಿಶ್ವಕರ್ಮ ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಸ್ವಪ್ನ, ವಲಯ ಮೇಲ್ವಿಚಾರಕಿ ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಅಮೃತ ಕಾರ್ಯಕ್ರಮ ನಿರೂಪಿಸಿದರು.


