ಮಂಗಳೂರು : ಲಂಚದ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂದಿಸಿದಂತೆ ಭೂಮಾಪಕನಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಪುತ್ತೂರು ಭೂಮಾಪನ ಇಲಾಖೆಯಲ್ಲಿ ಭೂಮಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಾದೇವ ನಾಯಕ್ ಶಿಕ್ಷೆಗೊಳಗಾದವರು ಎಂದು ತಹಿಳಿದು ಬಂದಿದೆ.
2014 ಮಾರ್ಚ್ 15 ರಂದು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಅಂಕಿತ ಎಂಬವರು ತನ್ನ ತಂದೆ ಕೃಷ್ಣಪ್ಪ ಅವರಿಗೆ ಸಂಬಂಧಿಸಿದ ಜಮೀನಿನನ್ನು ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡುವಂತೆ ಪುತ್ತೂರು ಭೂಮಾಪನ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಜಮೀನಿನನ್ನು ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ಭೂ ಮಾಪಕ ಮಹಾದೇವ ನಾಯಕ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಂಕಿತ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಇನ್ನು ಈ ಬಗ್ಗೆ 2014ರ ಮಾ. 15ರಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದಲ್ಲಿ ಮೊಕದ್ದಮೆ ದಾಖಲಾಗಿತ್ತು.
ಇನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ವಿಚಾರಣೆ ನಡೆಸಿ ಅ. 7ರಂದು ಅಂತಿಮ ತೀರ್ಪು ನೀಡಿದ್ದಾರೆ. ಆರೋಪಿ ಮಹಾದೇವ ನಾಯಕ್ಗೆ 3 ವರ್ಷ 3 ತಿಂಗಳ ಸಾದಾ ಸಜೆ ಹಾಗೂ 20,000 ರೂ. ದಂಡ ವಿಧಿಸಿದ್ದಾರೆ. ಒಂದು ವೇಳೆ ದಂಡ ಕಟ್ಟಲು ವಿಫಲನಾದರೆ 3 ತಿಂಗಳ ಹೆಚ್ಚುವರಿ ಸಾದಾ ಸಜೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಲೋಕಾಯುಕ್ತ ಮಂಗಳೂರಿನ ಪೊಲೀಸ್ ನಿರೀಕ್ಷಕರಾಗಿದ್ದು ಹಾಲಿ ಕಾರ್ಕಳ ಉಪ ವಿಭಾಗದ ಪೊಲೀಸ್ ಉಪನಿರೀಕ್ಷಕರಾಗಿರುವ ಎಸ್. ವಿಜಯ ಪ್ರಸಾದ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದಾರೆ.