


ಬಂಟ್ವಾಳ: ಸ್ವಾತಂತ್ರ್ಯ ಯೋಧ ಡಾ| ಅಮೈಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಮತ್ತು ಜನ್ಮ ಶತಾಬ್ದ ಆಚರಣೆ ಸಮಿತಿ ವತಿಯಿಂದ ಡಾ| ಅಮ್ಮೆಂಬಳ ಬಾಳಪ್ಪರ ಜನ್ಮಶತಾಬ್ದ ಸಂಭ್ರಮ ಫೆ. 25 ರಂದು ಬೆಳಗ್ಗೆ 10ರಿಂದ ಬಿ.ಸಿ.ರೋಡ್ನ ಸ್ಪರ್ಶಾ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಗೌರವಾಧ್ಯಕ್ಷ ಡಿ. ಚಂದಪ್ಪ ಮೂಲ್ಯ ಉಪ್ಪಿನಂಗಡಿ ಅವರು ತಿಳಿಸಿದ್ದಾರೆ.
ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ, ಭೂ ನ್ಯಾಯ ಮಂಡಳಿ ಸದಸ್ಯರಾಗಿ, ಶಿಕ್ಷಕ, ಪತ್ರಕರ್ತ, ಆಯುರ್ವೇದ ವೈದ್ಯ , ಸಹಕಾರಿ ಬ್ಯಾಂಕ್ ಸ್ಥಾಪಕಾಧ್ಯಕ್ಷರಾಗಿಡಾ.ಅಮ್ಮೆಂಬಳ ಬಾಳಪ್ಪ ಅವರು ಗುರುತಿಸಿಕೊಂಡಿದ್ದರು ಎಂದು ವಿವರಿಸಿದರು.
ಅಂದು ಬೆಳಗ್ಗೆ 9 ಗಂಟೆಗೆ ಪೂರ್ವಭಾವಿಯಾಗಿ ಅಮ್ಮೆಂಬಳ ಬಾಳಪ್ಪ ಅವರ ಭಾವಚಿತ್ರದ ಟ್ಯಾಬ್ಲೊ ನಗರ ಪ್ರದಕ್ಷಿಣೆ ನಡೆಯಲಿದ್ದು, 9.30ಕ್ಕೆ ಬಿ.ಸಿ.ರೋಡ್ ನಾರಾಯಣಗುರು ವೃತ್ತದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶಿರ್ವಚನ ನೀಡಲಿದ್ದಾರೆ. ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಡಾ.ಅಮ್ಮೆಂಬಳ ಬಾಳಪ್ಪ ಅವರ ವಿಶೇಷ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ, ಮಾಜಿ ಸಚಿವ ಬಿ.ರಮಾನಾಥ ರೈ ಅತಿಥಿಯಾಗಿ ಭಾಗವಹಿಸಲಿದ್ದು, ತೆಂಕನಿಡಿಯೂರು ಕಾಲೇಜು ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ| ದುಗ್ಗಪ್ಪ ಕಜೆಕಾರ್ ಅವರು ಉಪನ್ಯಾಸ ನೀಡಲಿದ್ದಾರೆ. ಸಮಿತಿ ಗೌರವಾಧ್ಯಕ್ಷ ಆನಂದ ಅಮೈಂಬಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸಾಧಕರಿಗೆ ಸಮ್ಮಾನ, ವಿಶೇಷ ಸಂಚಿಕೆ ಬಿಡುಗಡೆ,ಉಚಿತ ವೈದ್ಯಕೀಯ ಶಿಬಿರ, ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹಧನ ವಿತರಣೆ ಮೊದಲಾದ ಕಾರ್ಯಕ್ರಮಗಳು ಈ ಸಂದರ್ಭ ನಡೆಯಲಿದೆ ಎಂದರು.
ಸೇವಾ ಪ್ರತಿಷ್ಠಾನದ ಕೋಶಾಧಿಕಾರಿ ರವೀಂದ್ರನಾಥ್, ಕಾರ್ಯದರ್ಶಿ ಉಮೇಶ್ ಪಿ.ಕೆ. ಉಪಸ್ಥಿತರಿದ್ದರು.


