ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಬೆಂದೂರ್ ವೆಲ್ ಬಳಿ ಸಂಭವಿಸಿದೆ.


ಮೃತರನ್ನು ಐರಿನ್ ಡಿಸೋಜ ಎಂದು ಗುರುತಿಸಲಾಗಿದೆ.
ಆ್ಯಗ್ನೆಸ್ ಸರ್ಕಲ್ ಕಡೆಯಿಂದ ಬಂದ ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದೆ. ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಐರಿನ್ ಅವರ ಮೈಮೇಲೆ ಬಸ್ಸಿನ ಮುಂಭಾಗದ ಚಕ್ರ ಹರಿದಿದೆ. ಇದರಿಂದ ತೀವ್ರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಪಾದಾಚಾರಿ ಮಹಿಳೆಗೆ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದು, ಬಸ್ ಚಾಲಕ ಬಸ್ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಧಾವಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.












