ವಿಟ್ಲ: ಅಳಿಕೆ ಶ್ರೀಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ಪ್ರಾರ್ಥನಾ ಮಂದಿರದಲ್ಲಿ ೨೦೧೯-೨೦ನೇ ಸಾಲಿನ ಶೈಕ್ಷಣಿಕ ವರ್ಷದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಾಗಾರ ಉದ್ಘಾಟನೆಗೊಂಡಿತು.
ಶಿಬಿರ ಉದ್ಘಾಟಿಸಿದ ಅಳಿಕೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಪದ್ಮನಾಭ ಪೂಜಾರಿ ಎಸ್. ಮಾತನಾಡಿ ವಿದ್ಯಾರ್ಥಿ ಸಮುದಾಯವನ್ನು ಸಮಾಜಮುಖಿಯನ್ನಾಗಿಸಬೇಕು ಎಂಬ ಉದ್ದೇಶದಿಂದ ೧೯೬೯ ರಂದು ಗಾಂಧೀಜಿಯ ಜನ್ಮ ಶತಾಬ್ಧಿಯಂದು ಎನ್ನೆಎಸ್ಸೆಸ್ ದೇಶದಲ್ಲಿ ಆರಂಭಿಸಲಾಯಿತು. ನನಗಲ್ಲ ನಿನಗೆ ಎಂಬ ಘೋಷ ವಾಕ್ಯದೊಂದಿಗೆ ಸ್ವಾರ್ಥ ರಹಿತ ಸಮಾಜ ನಿರ್ಮಾಣವೇ ಇದರ ಗುರಿ. ಸಮಾಜದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ಶಿಬಿರಾರ್ಥಿಯು ತನ್ನನ್ನು ತೊಡಗಿಸಿಕೊಳ್ಳಲು ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಇದು ಸಹಕಾರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಕೆ.ಎಸ್. ಕೃಷ್ಣ ಭಟ್ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ ಭಟ್ ಯಸ್., ಕಾಲೇಜಿನ ಪ್ರಿನ್ಸಿಪಾಲ್ ಡಾ| ಎಂ. ಸಿದ್ದರಾಜು ಉಪಸ್ಥಿತರಿದ್ದರು. ಯೋಜನಾಧಿಕಾರಿ ವೆಂಕಟಕೃಷ್ಣ ಶರ್ಮ ಸ್ವಾಗತಿಸಿದರು. ಉಪನ್ಯಾಸಕರಾದ ಧನಂಜಯ ಪಿ. ವಂದಿಸಿದರು. ವಿದ್ಯಾರ್ಥಿ ಅನಿರುಧ್ ಭಟ್ ನಿರೂಪಿಸಿದರು. ವಿದ್ಯಾರ್ಥಿ ದೀಪಕ್ ಹಾಡನ್ನು ಹಾಡಿದರು. ಶಿಬಿರಾರ್ಥಿಗಳು ಮತ್ತು ಉಪನ್ಯಾಸಕರು ಪಾಲ್ಗೊಂಡರು.














