ಬಂಟ್ವಾಳ: ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೆತೃತ್ವದಲ್ಲಿ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿ.ಸಿ.ರೋಡು ಕೈಕಂಬದಿಂದ ಬಿ.ಸಿ.ರೋಡು ಜಂಕ್ಷನ್ ವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಯಿತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಪಾತಾಳಕ್ಕೆ ಕುಸಿದರೂ, ಕೇಂದ್ರ ಸರ್ಕಾರ ಜನರನ್ನು ಮರುಳು ಮಾಡಿ ಪೆಟ್ರೋಲ್, ಡಿಸೇಲ್ ಏರಿಕೆ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದರು. ಹಿಂದೆ ಯುಪಿಎ ಅವಧಿಯಲ್ಲಿ ತೈಲ ಬೆಲೆ 140 ಡಾಲರ್ ಇದ್ದಾಗ, ಪೆಟ್ರೋಲ್, ಡಿಸೇಲ್ ಬೆಲೆ 60 ರೂ.ಗಳಿಗಿಂತಲೂ ಕಡಿಮೆ ಇತ್ತು. ಆದರೆ ಈಗ 40 ಡಾಲರ್ ಗೆ ತಲುಪಿದರೂ, ಕೇಂದ್ರ ಸರ್ಕಾರ ಬೆಲೆಯನ್ನು ಗಗನಕ್ಕೇರಿಸುತ್ತಿದೆ. ಇದರಿಂದಾಗಿ ದಿನಬಳಕೆಯ ವಸ್ತುಗಳಿಗೂ ಬೆಲೆ ಏರಿಕೆಯಾಗುವ ಅಪಾಯ ಎದುರಾಗಿದೆ ಎಂದು ಆರೋಪಿಸಿದರು.
ಪಾದಯಾತ್ರೆ ಸಂದರ್ಭದಲ್ಲಿ ಬೆಲೆ ಏರಿಕೆಯನ್ನು ಖಂಡಿಸಿ ಜೀಪಿಗೆ ಹಗ್ಗ ಕಟ್ಟಿ ಏಳೆಯಲಾಯಿತು. ಬಳಿಕ ತಹಶೀಲ್ದಾರ್ ಮೂಲಕ ಬೆಲೆ ಇಳಿಕೆಗೆ ಆಗ್ರಹಿಸಿ ಸರಕಾರಕ್ಕೆ ಮನವಿ ನೀಡಲಾಯಿತು.


ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪ್ರಮುಖರಾದ ಸುದರ್ಶನ ಜೈನ್, ಪದ್ಮನಾಭ ರೈ, ಸದಾಶಿವ ಬಂಗೇರ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಸಂಜೀವ ಪೂಜಾರಿ, ಯೂಸುಫ್ ಕರಂದಾಡಿ, ಹಸೈನಾರ್, ಲುಕ್ಮಾನ್, ಸಿದ್ದೀಕ್ ಗುಡ್ಡೆಯಂಗಡಿ, ಮಹಮ್ಮದ್ ನಂದರಬೆಟ್ಟು, ಮಹಮ್ಮದ್ ನಂದಾವರ, ಲೋಲಾಕ್ಷ, ಗಂಗಾಧರ ಪೂಜಾರಿ, ವೆಂಕಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.


