Wednesday, January 28, 2026

ಬಿ.ಸಿ.ರೋಡಿನ ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್, ಸಾರ್ವಜನಿಕ ಸಮಸ್ಯೆಗೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

ಬಂಟ್ವಾಳ: ರೈಲು ಇಲಾಖೆಗೆ ಸಂಬಂದಿಸಿಸಂತೆ ಸ್ಥಳೀಯರ ಬೇಡಿಕೆ ಮತ್ತು ದೂರುಗಳಿಗೆ ಸೂಕ್ತವಾದ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಂಸದ ನಳಿನ್ ಕುಮಾರ್ ಕಟೀಲು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಅವರು ಇಂದು ಮಧ್ಯಾಹ್ನ 12 ಗಂಟೆಯ ವೇಳೆ ಬಿಸಿರೋಡಿನ ರೈಲ್ವೆ ನಿಲ್ದಾಣದ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಮುಂದಿನ ಫೆಬ್ರವರಿ ತಿಂಗಳೊಳಗೆ ಬಂಟ್ವಾಳ ರೈಲ್ವೆ ಸ್ಟೇಶನ್ ನಲ್ಲಿ ಕೇಂದ್ರ ಆದರ್ಶ ಯೋಜನೆಯಡಿ ನಡೆಯುತ್ತಿರುವ ಸುಮಾರು 5.5 ಕೋಟಿ ರೂ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಶಾಸಕ ಯು.ರಾಜೇಶ್ ನಾಯ್ಕ್ ಅವರು ರೈಲ್ವೆ ನಿಲ್ದಾಣದ ಸಾರ್ವಜನಿಕ ಸಮಸ್ಯೆಯ ಬಗ್ಗೆ ನನ್ನ ಗಮನಕ್ಕೆ ತಂದಿದ್ದರು.
ಈ ಹಿನ್ನಲೆಯಲ್ಲಿ ಶನಿವಾರ ಮಧ್ಯಾಹ್ನ ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಸೆಕ್ಷನ್ ಇಂಜಿನಿಯರ್ ಕೆ.ಪಿ.ನಾಯ್ಡು ಅವರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅವರು ಅಧಿಕಾರಿಗಳಿಗೆ ಕಾಮಗಾರಿ ವೇಗವಾಗಿ ನಡೆಸುವ ಕುರಿತು ಸಲಹೆ ಸೂಚನೆಗಳನ್ನು ನೀಡಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ನಿರ್ವಹಿಸಲು ಸೂಚಿಸಿದರು.

ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿರುವ ಎರಡು ಪ್ಲಾಟ್ ಫಾರ್ಮ್ ಗಳ ವಿಸ್ತರಣಾ ಕಾರ್ಯ ನಡೆಯುತ್ತಿದ್ದು, ಮೊದಲನೇ ಪ್ಲಾಟ್ ಫಾರ್ಮ್ ಶೇ.50 ಮತ್ತು ಎರಡನೇ ಪ್ಲಾಟ್ ಫಾರ್ಮ್ ಶೇ.60ರಷ್ಟು ಕೆಲಸಗಳಾಗಿವೆ. 67 ಲಕ್ಷ ರೂ ವೆಚ್ಚದಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಇದಾದರೆ ರೈಲು ನಿಲ್ದಾಣ ಬಿ.ಸಿ.ರೋಡಿಗೆ ಮತ್ತಷ್ಟು ಹತ್ತಿರವಾಗಲಿದೆ ಎಂದರು. ಪ್ಲಾಟ್ ಫಾರ್ಮ್ ಗೆ ಮೇಲ್ಛಾವಣಿ, ವಿದ್ಯುದ್ದೀಪ, ಪ್ರಯಾಣಿಕರಿಗೆ ಆಸನಗಳ ವ್ಯವಸ್ಥೆ, ಶುದ್ಧೀಕರಿಸಿದ ಕುಡಿಯುವ ನೀರು, ಅಂಗವಿಕಲರಿಗೆ ವಿಶೇಷ ಶೌಚಗೃಹ, ಹೊಸ ಶೌಚಾಲಯ ಕಾಂಪ್ಲೆಕ್ಸ್ ರಚನೆ, ಪ್ಲಾಟ್ ಫಾರ್ಮ್ ಸುತ್ತಲೂ ಆವರಣಗೋಡೆ ನಿರ್ಮಾಣವಾಗುತ್ತಿರುವ ಕಾರಣ ಇಲ್ಲಿ ರೈಲು ಬರುವ ಹೊತ್ತಿಗೆ ಪ್ಲಾಟ್ ಫಾರ್ಮ್ ನಲ್ಲಿರುವ ಬೆಂಚು, ಆಸನಗಳಲ್ಲಿ ಪ್ರಯಾಣಿಕರಲ್ಲದವರು ಆಸೀನರಾಗದಂತೆ ಮಾಡುವುದು, ಎಲ್ಲಿಂದಲೋ ಬಂದು ಇಲ್ಲಿ ಕುಳಿತು ವ್ಯವಹಾರ ಮಾಡುವವರನ್ನು ನಿಲ್ಲದಂತೆ ಮಾಡಲು ರೈಲ್ವೆ ಭದ್ರತಾ ವ್ಯವಸ್ಥೆ ಗಟ್ಟಿಗೊಳಿಸುವುದು ಹಾಗೂ ರೈಲ್ವೆ ಸೇತುವೆಯಲ್ಲಿ ನಡೆದುಕೊಂಡು ಹೋಗಲು ಹಳಿಯ ಬಳಿಯಲ್ಲಿ ಕಿತ್ತು ಹೋಗಿರುವ ಶೀಟ್ ಗಳನ್ನು ಮತ್ತೆ ಹಾಕಿಸಲಾಗುತ್ತದೆ ಎಂದರು.

ತತ್ಕಾಲ್ ಬುಕ್ಕಿಂಗ್ ಸಂದರ್ಭ ಮಧ್ಯವರ್ತಿಗಳದ್ದೇ ಹಾವಳಿ ಜಾಸ್ತಿ ಇರುತ್ತದೆ. ಇಂಥ ಸನ್ನಿವೇಶಗಳು ನಿರ್ಮಾಣವಾಗದಂತೆ ಎಚ್ಚರವಹಿಸಬೇಕು ಎಂದು ಸಾರ್ವಜನಿಕರ ದೂರುಗಳು ಬಂದಿವೆ, ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು, ರೈಲ್ವೆ ನಿಲ್ದಾಣದಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು ಹಾಗೂ ಅಕ್ರಮ ಚಟುವಟಿಕೆಗಳು ನಡೆಸದಂತೆ ಸಿಸಿ ಕ್ಯಾಮರಾ ನಿಗಾ ವಹಿಸಲಿದೆ ಎಂದರು,

ಕೈಕುಂಜೆ ಪೂರ್ವ ಬಡಾವಣೆಗೆ ತಿರುಗುವ ರಸ್ತೆ ಸಹಿತ ಯಾವುದೇ ಜನವಸತಿ ಪ್ರದೇಶಗಳಿಗೆ ತೆರಳುವ ರಸ್ತೆಗಳನ್ನು ಕಾಮಗಾರಿ ಸಂದರ್ಭ ಮುಚ್ಚುವುದಿಲ್ಲ, ಈ ಕುರಿತು ಸ್ಥಳೀಯರಲ್ಲಿ ಆತಂಕ ಬೇಡ ಎಂದು ನಳಿನ್ ಸ್ಪಷ್ಟಪಡಿಸಿ, ಅಧಿಕಾರಿಗಳಿಗೆ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಿಜೆಪಿ ಜಿಲ್ಲಾ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ, ನಾಯಕಿ ಸುಲೋಚನಾ ಜಿ.ಕೆ.ಭಟ್, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಪ್ರಮುಖರಾದ ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಸ್ಥಳೀಯರಾದ ಫ್ರಾನ್ಸಿಸ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಇದೇ ವೇಳೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಂಗಳೂರು ರೈಲು ಬಳಕೆದಾರರ ಹಿತರಕ್ಷಣಾ ವೇದಿಕೆಯ ಸಂಚಾಲಕ ಸುದರ್ಶನ ಪುತ್ತೂರು ಸಂಸದರಿಗೆ ಬೇಡಿಕೆಗಳ ಪಟ್ಟಿ ಮಂಡಿಸಿ, ನೇರಳಕಟ್ಟೆಯಲ್ಲಿ ಪ್ಯಾಸೆಂಜರ್ ರೈಲು ಸಂಜೆ ನಿಲುಗಡೆ, ಫರಂಗಿಪೇಟೆ ಪೂರ್ಣಪ್ರಮಾಣದ ನಿಲ್ದಾಣ ಸಹಿತ ಹಲವು ವಿಚಾರಗಳನ್ನು ಮಂಡಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...