ಬೆಳ್ತಂಗಡಿ: ಬಸ್ಸಿನಲ್ಲಿ ಯುವತಿಯೊಂದಿಗೆ ಮಾತನಾಡಿದ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ.


ಹಲ್ಲೆಗೆ ಒಳಗಾದ ಯುವಕ ಕಕ್ಕಿಂಜೆ ನಿವಾಸಿ ಶಾಹಿಲ್ ಎಂದು ಗುರುತಿಸಲಾಗಿದೆ.
ಈತ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದು, ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಗೆ ಒಳಗಾಗಿರುವ ಶಾಹಿಲ್ ಬೆಳ್ತಂಗಡಿ ಸರಕಾರಿ ಅಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದು ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದು ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.












