ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗಳಿಗೆ ಕೊರೊನಾ ದೃಢಪಟ್ಟಿರುವ ಕಾರಣ ಇಂದಿನಿಂದ ಕೆಲವು ದಿನಗಳ ಕಾಲ ತಾನು ತನ್ನ ಮನೆಯಿಂದಲೇ ಕಾರ್ಯಗಳನ್ನು ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಬಿಎಸ್ವೈ ಅವರು ತಿಳಿಸಿದ್ದಾರೆ.


ಈ ಬಗ್ಗೆ ತಿಳಿಸಿರುವ ಅವರು, ಅಗತ್ಯವಾದ ಸಲಹೆ ಸೂಚನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೀಡಲಿದ್ದೇನೆ. ಯಾರೂ ಈ ಬಗ್ಗೆ ಭಯ ಬೀಳುವ ಅವಶ್ಯಕತೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಕೊರೊನಾ ನಿಯಂತ್ರಣಕ್ಕಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಾರೆ.
ಮೂಲಗಳ ಪ್ರಕಾರ ಸಿಎಂ ಅವರ ಗೃಹ ಕಚೇರಿಯ ದೂರವಾಣಿ ಆಪರೇಟರ್, ಇಬ್ಬರು ಎಸ್ಕಾರ್ಟ್, ಅಡುಗೆಯವರು ಸೇರಿದಂತೆ ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸುಮಾರು ಹತ್ತು ಮಂದಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಇದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಕೃಷ್ಣಾ ಹಾಗೂ ಕಾವೇರಿ ನಿವಾಸಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.












