ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶೀಘ್ರ ಶಾಲೆ ಆರಂಭಿಸುವಂತೆ ಆಗ್ರಹಿಸಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಡ್ ಅಭಿಯಾನಕ್ಕೆ ಗುರುವಾರ ದಡ್ಡಲಕಾಡು ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಲಾಯಿತು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಅಭಿಯಾನದಂಗವಾಗಿ ಒಂದು ಸಾವಿರಕ್ಕಿಂತಲೂ ಅಧಿಕ ಮಂದಿ ಪೋಷಕರು ಸ್ವಯಂ ಪ್ರೇರಿತರಾಗಿ ಕಾರ್ಡ್ ಪೋಸ್ಟ್ ಮಾಡುವ ಮೂಲಕ ಅಭಿಯಾನದಲ್ಲಿ ಕೈ ಜೋಡಿಸಿದರು.
ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ ಆನ್ ಲೈನ್ ಹಾಗೂ ವಿದ್ಯಾಗಮ ಶಿಕ್ಷಣ ವ್ಯವಸ್ಥೆಯನ್ನು ಅವಲಂಭಿಸುವ ಬದಲು ಮುಖಾಮುಖಿ ಶಿಕ್ಷಣಕ್ಕೆ ಆದ್ಯತೆ ಕೊಟ್ಟು ಶೀಘ್ರ ಶಾಲೆ ಆರಂಭಿಸುವಂತೆ ಪೋಷಕರ ಒತ್ತಾಯಗಳು ಕೇಳಿ ಬಂದ ಹಿನ್ನಲೆಯಲ್ಲಿ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಜುಲೈ 21 ರ ಒಳಗಾಗಿ ಶಾಲೆ ಆರಂಭಿಸುವಂತೆ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸಹಿತ ಜನಪ್ರತಿನಿಧಿಗಳಿಗೆ ಈಗಾಗಲೇ ಮನವಿಯನ್ನು ಸಲ್ಲಿಸಲಾಗಿದೆ. ಮಕ್ಕಳ ಸುರಕ್ಷತೆ ಹಾಗೂ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆ ಆರಂಭಿಸುವಂತೆ ಆಗ್ರಹಿಸುವ ಪೋಷಕರು ಕಾರ್ಡ್ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದ ಅವರು ತಮ್ಮ ತಮ್ಮ ಮನೆಯಿಂದಲೇ ಶಿಕ್ಷಣ ಸಚಿವರಿಗೆ ಕಾರ್ಡ್ ಬರೆಯುವಂತೆ ಮನವಿ ಮಾಡಿದರು.
ಈ ಸಂದರ್ಭ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಕಾರ್ಯದರ್ಶಿ ಪುರುಷೋತ್ತಮ ಅಂಚನ್, ಸದಸ್ಯ ರಾಮಚಂದ್ರ ಪೂಜಾರಿ ಕರೆಂಕಿ ಮತ್ತಿತರರು ಉಪಸ್ಥಿತರಿದ್ದರು.
