ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕೋವಿಡ್-19 ದ.ಕ. ಜಿಲ್ಲೆಯಾದ್ಯಂತ ಹಬ್ಬುತಿದ್ದು, ಈ ನಡುವೆ ಒಂದು ನಿರ್ಧಿಷ್ಟ ಕೋಮುವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕವಾಗಿ ಹಾಗೂ ಕೋಮು ಪ್ರಚೋದನಕಾರಿಯಾಗಿ ಸುದ್ದಿಗಳನ್ನು ಭಿತ್ತರಿಸುತ್ತಿರುವುದು ಮತ್ತು ಇತರರೊಂದಿಗೆ ಹಂಚಿಕೊಳ್ಳುತ್ತಿರುವುದು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 4 ಕ್ರಿಮಿನಲ್ ಪ್ರಕರಣಗಳು ದಾಖಲಗಿದೆ.
ಮುಂದಿನ ದಿನಗಳಲ್ಲೂ ಸಹ ಈ ರೀತಿ ಯಾವುದೇ ಕೋಮಿನ ಧಾರ್ಮಿಕತೆಗೆ ಧಕ್ಕೆಯಾಗುವಂತೆ ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಸುದ್ದಿ ಅಥವಾ ಚಿತ್ರಗಳನ್ನು ಭಿತ್ತರಿಸಿದಲ್ಲಿ ಅಥವಾ ಇತರರೊಂದಿಗೆ ಹಂಚಿಕೊಂಡಲ್ಲಿ ಅಂತಹ ಕಿಡಿಗೇಡಿಗಳ ಮೊಬೈಲ್ ವಶಪಡಿಸಲಾಗುವುದು ಹಾಗೂ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಇಂತಹ ಕೃತ್ಯದಲ್ಲಿ ಭಾಗಿಯಾಗಿದ್ದರೆ ಅಂತಹವರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿಟ್ಟು ಕ್ವಾರಂಟೈನ್ ಅವಧಿ ಮುಗಿದ ಕೂಡಲೇ ಅವರುಗಳ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲೆಯ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














