ಬೆಂಗಳೂರು: ಸಾಂಕ್ರಮಿಕ ರೋಗ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ13 ದಿನ ಬಂದ್ ಮುಂದುವರಿಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾ.31ರ ವರೆಗೆ ಬಂದ್ ವಿಸ್ತರಿಸಲಾಗಿದೆ.
ಮಾಲ್, ಚಿತ್ರಮಂದಿರ, ಉದ್ಯಾನವನ, ಶಾಲಾ-ಕಾಲೇಜು, ಮದುವೆ, ಜಾತ್ರೆ, ಉತ್ಸವ, ಮೇಳ ಬಂದ್ ಮಾಡಲಾಗಿದ್ದು ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳು ಪೂರ್ತಿ ಬಂದ್ ಮುಂದುವರೆಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಪ್ರಸ್ತುತ ಸೋಂಕು ನಿಯಂತ್ರಣಕ್ಕೆ ಬಾರದೆ ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಂದ್ ಗಡುವು ವಿಸ್ತರಿಸಲಾಗಿದೆ.
ಈ ಸಂದರ್ಭದಲ್ಲಿ ಸೋಂಕು ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಯಿತು. ಈ ಟಾಸ್ಕ್ ಫೋರ್ಸ್ಗಳನ್ನು ಡಾ. ಅಶ್ವಥ್ ನಾರಾಯಣ, ಶ್ರೀರಾಮುಲು, ಬಸವರಾಜ ಬೊಮ್ಮಾಯಿ ಹಾಗೂ ಕೆ. ಸುಧಾಕರ್ ಅವರ ನೇತೃತ್ವದಲ್ಲಿ ರಚಿಸಲಾಯಿತು.

