ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯಗಳಲ್ಲಿ ನಡೆಯಲಿದೆ.


ಈ ಕಾರ್ಯಕ್ರಮದ ಮೂಲಕ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ಆಸ್ತಿ ವಿವಾದಗಳು, ವಿಭಾಗ ಮೊಕದ್ದಮೆಗಳು, ಹಣ ವಸೂಲಿ ಪ್ರಕರಣಗಳು, ನಿರ್ಧಿಷ್ಟ ಪರಿಹಾರ ಕಾಯ್ದೆಯಡಿಯಲ್ಲಿ ದಾಖಲಾದ ಮೊಕದ್ದಮೆಗಳು, ಮೋಟಾರು ವಾಹನ ಪ್ರಕರಣಗಳು, ಎಂಎಂಆರ್ಡಿ ಪ್ರಕರಣಗಳು, ವಿವಾಹ ಸಮನ್ವಯ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಮತ್ತು ಇತರ ರಾಜಿಯೋಗ್ಯ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಸಿವಿಲ್ ಮತ್ತು ಕ್ರಿಮಿನಲ್ ವಿವಾದಗಳನ್ನು ಪರಿಹರಿಸಿಕೊಳ್ಳಲು ಪ್ರಯತ್ನ ಮಾಡುವುದಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಜೊತೆಗೆ ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಮತ್ತು ನೀರಿನ ಶುಲ್ಕಗಳಿಗೆ ಸಂಬಂಧಿಸಿದ ವಿವಾದಗಳು, ಕಾರ್ಮಿಕ ವಿವಾದಗಳು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಬಹುದಾಗಿದೆ. ವಕೀಲರ ಮುಖಾಂತರ ಅಥವಾ ತಾವೇ ಖುದ್ದಾಗಿ ಸಮಿತಿಗೆ ಭೇಟಿ ನೀಡಿ ಪ್ರಕರಣವನ್ನು ರಾಜಿ ಮಾಡಿಕೊಳ್ಳಬಹುದು ಎಂದು ಬಂಟ್ವಾಳ ತಾಲುಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರು ಶ್ರೀ ಅನಿಲ್ ಪ್ರಕಾಶ್ ಎಂ. ಪಿ ಹಾಗೂ ಸದಸ್ಯ ಕಾರ್ಯದರ್ಶಿ ಶ್ರೀ ಕೃಷ್ಣ ಮೂರ್ತಿ. ಎನ್ ಅವರು ತಿಳಿಸಿದ್ದಾರೆ.
ನ್ಯಾಯಾಂಗ ಅಧಿಕಾರಿಗಳು, ವಕೀಲರು ಮತ್ತು ಇಲಾಖಾಧಿಕಾರಿಗಳು, ವಿಮಾ ಸಂಸ್ಥೆಗಳು ಮತ್ತು ಬ್ಯಾಂಕ್ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯು ವಿಚಾರಣೆ ನಡೆಸಿ ವಿವಾದಗಳನ್ನು ಇತ್ಯರ್ಥಪಡಿಸುವಲ್ಲಿ ಮಾರ್ಗದರ್ಶನ ನೀಡಲಾಗಿತ್ತು.
ಜನರಿಗೆ ಲೋಕ ಅದಾಲತ್ ಬಗ್ಗೆ ತಿಳಿಯುವಂತೆ ಮಾಡಲು ಪುರಸಭೆಗೆ ಕಸ ವಿಲೇವಾರಿ ವಾಹನಕ್ಕೆ ಲೋಕ ಅದಾಲತ್ಗೆ ಸಂಬಂಧಿಸಿದ ಆಡೀಯೋ ತುಣುಕನ್ನು ನೀಡಿದ್ದು, ಪ್ರತಿ ವಾರ್ಡಿಗೆ ಕಸ ಸಂಗ್ರಹಿಸಲು ಹೋಗುವಾಗ ಸದರಿ ಆಡೀಯೋ ವನ್ನು ಹಾಕಿ ಮನೆ ಮನೆಗೆ ಈ ವಿಚಾರ ತಿಳಿಯವಂತೆ ಮಾಡುವ ಕ್ರಮವನ್ನು ಸಮಿತಿಯು ಕೈಗೊಂಡಿದೆ.
ಜನಸಾಮಾನ್ಯರು ಹಾಗೂ ಕಕ್ಷಿದಾರರು ದಾವಾ ಪ್ರಕರಣಗಳನ್ನು ಮತ್ತು ದಾವಾ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸುವವರು ನ್ಯಾಯಾಲಯಕ್ಕೆ ಹಾಜರಾಗಿ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಹಾಜರಾಗಿ ಸದುಪಯೋಗಪಡಿಸಿಕೊಳ್ಳಲು ಅವಕಾಶವನ್ನು ನ್ಯಾಯಾಲಯವು ನೀಡಿದೆ.












