ಚಿಕ್ಕಬಳ್ಳಾಪುರ: ಜೂನ್ 5 ರಂದು ಉಡುಪಿಯಲ್ಲಿ 300 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ವರದಿಯಾಗುವ ನಿರೀಕ್ಷೆಯಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಉಡುಪಿ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಜೂನ್ 5 ರ ಶುಕ್ರವಾರದಂದು ಸುಮಾರು 300 ರಿಂದ 350 ಪ್ರಕರಣಗಳು ನಿರೀಕ್ಷೆಯಿದೆ. ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ನಿಯಂತ್ರಿಸುವ ಸಭೆಯನ್ನು ಈಗಾಗಲೇ ಆ ಜಿಲ್ಲೆಗಳ ಅಧಿಕಾರಿಗಳೊಂದಿಗೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಧಾರ್ಮಿಕ ಸ್ಥಳಗಳು ಮತ್ತು ಶಾಲೆಗಳನ್ನು ತೆರೆದರೆ ಇನ್ನೂ ಹೆಚ್ಚಿನ ಅಪಾಯಕ್ಕೆ ಆಹ್ವಾನ ನೀಡಿದಂತಾಗುತ್ತದೆ. ಸಾಂಕ್ರಾಮಿಕ ಕೊರೊನಾ ವೈರಸ್ ನಿಂದ ನಮ್ಮನ್ನು ನಾವು ಕಾಪಾಡಿಕೊಂಡು ಬದುಕಲು ಕಲಿಯಬೇಕಾಗಿದೆ. ಸಾಮಾಜಿಕ ಅಂತರವನ್ನು ಎಲ್ಲಾ ಸಮಯದಲ್ಲೂ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಮಹಾರಾಷ್ಟ್ರದಿಂದ ಉಡುಪಿಗೆ ಆಗಮಿಸಿರುವವರಲ್ಲಿ ಶೇ.9೦ ರಷ್ಡು ಮಂದಿಯಲ್ಲಿ ಕೋವಿಡ್-19 ಪಾಸಿಟಿವ್ ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 563 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಅವುಗಳಲ್ಲಿ ಒಟ್ಟು 108 ಜನರನ್ನು ಬಿಡುಗಡೆ ಮಾಡಲಾಗಿದೆ ಹಾಗೂ 454 ಪ್ರಕರಣ ಸಕ್ರಿಯವಾಗಿವೆ ಎಂದು ಮಾಹಿತಿಯನ್ನು ಸಚಿವ ಡಾ.ಕೆ.ಸುಧಾಕರ್ ನೀಡಿದರು.

