ಬಂಟ್ವಾಳ: ನಂಬಿಕೆಯಲ್ಲಿ ಬಲವಿದ್ದಾಗ ಅದು ನಮ್ಮನ್ನು ಮುನ್ನಡೆಸುತ್ತದೆ. ಸಂಸ್ಕೃತಿ, ಸಂಸ್ಕಾರ ಬೆಳೆಸಲು ಇಂತಹ ಉತ್ಸವಗಳು ಅತಿ ಅವಶ್ಯಕ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.



ಅವರು ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಯ ವತಿಯಿಂದ ೧೯ನೇ ವರ್ಷದ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಎಲ್ಲರಿಗೂ ವಿನಾಯಕನೇ ನಾಯಕನಾಗಿದ್ದು, ಆತನೇ ನಮ್ಮನ್ನು ಮುನ್ನಡೆಸುತ್ತಾನೆ ಎಂದರು.
ಸೋಲೂರು ಮಠದ ಪೀಠಾಽಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಮನಸ್ಸು, ಮನಸ್ಸುಗಳು ಕೂಡಿದಾಗ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಸ್ತಾವನೆಗೈದು, ಇಂತಹ ಉತ್ಸವಗಳ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸಲಿ ಎಂದರು.
ಕಲಾತರಂಗ ನಿರ್ಮಾಣದ ಮಂಗಳಮೂರ್ತಿ ಜಕ್ರಿಬೆಟ್ಟು ಗಣಪ ಆಲ್ಬಮ್ ಸಾಂಗ್ ಬಿಡುಗಡೆಗೊಳಿಸಲಾಯಿತು. ವೇದಿಕೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ರೋಟರಿ ಜಿಲ್ಲಾ ಗವರ್ನರ್ ಎನ್.ಪ್ರಕಾಶ್ ಕಾರಂತ, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ, ಉದ್ಯಮಿ ಪ್ರಶಾಂತ್ ಸನಿಲ್, ಸಮಿತಿಯ ಅಧ್ಯಕ್ಷ ಬಿ.ಪದ್ಮಶೇಖರ್ ಜೈನ್ ಉಪಸ್ಥಿತರಿದ್ದರು.
ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿದರು. ಉಪಾಧ್ಯಕ್ಷ ಬೇಬಿ ಕುಂದರ್ ವಂದಿಸಿದರು. ಕಾರ್ಯದರ್ಶಿ ರಾಜೀವ ಕಕ್ಯಪದವು ಕಾರ್ಯಕ್ರಮ ನಿರ್ವಹಿಸಿದರು.












