ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾ.31 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ ಮೂರರವರೆಗೆ ಜಿಲ್ಲೆಯ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಈ ಅವಧಿಯಲ್ಲಿ ಕೊರೋನಾ ವೈರಾಣು ಹರಡುವಿಕೆಯನ್ನು ತಪ್ಪಿಸಲು ಆರೋಗ್ಯ ಇಲಾಖೆ ಸೂಚಿಸಿದ ನಿರ್ದೇಶನಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.



ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ವೈರಾಣು ನಿಯಂತ್ರಣ ಸೂಚನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದ್ದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಹೆಚ್ಚಿನ ಜಾಗೃತಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದವರು ಹೇಳಿದರು. ದಿನಸಿ ಅಂಗಡಿಯ ಪರವಾನಿಗೆ ಮತ್ತು ಆಹಾರ ಸಾಮಾಗ್ರಿಗಳೂ ಇದ್ದೂ, ಕೊರೋನಾ ಭೀತಿಯಿಂದ ಅಂಗಡಿಗಳನ್ನು ತೆರೆಯದೆ ಇದ್ದಲ್ಲಿ, ಅದು ಅಪರಾಧವಾಗುತ್ತದೆ. ಅಂತಹ ಅಂಗಡಿ ಮಾಲಕರ ವಿರುದ್ಧ ಸೂಕ್ತ ಕ್ರಮವನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ ಎಂದು ಅವರು ಈ ಸಂದರ್ಭ ಎಚ್ಚರಿಸಿದರು. ಸಜಿಪನಡು ಗ್ರಾಮ ವನ್ನು ಸಂಪೂರ್ಣ ಲಾಕ್ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳಿಗೆ ದಿನಸಿ ಸಾಮಗ್ರಿಗಳನ್ನು ಮನೆ-ಮನೆಗೆ ತಲುಪಿಸುವ ಕಾರ್ಯವನ್ನು ಜಿಲ್ಲಾಡಳಿತ ಗ್ರಾಮಪಂಚಾಯತ್ ನ ಟಾಸ್ಕ್ಫೋರ್ಸ್ ಸಮಿತಿಯ ಮೂಲಕ ನಡೆಸಲಾಗುತ್ತಿದೆ ಎಂದವರು ಹೇಳಿದರು. ನಿರಾಶ್ರಿತರಿಗೆ, ವಲಸೆ ಕಾರ್ಮಿಕರಿಗೆ ಊಟದ ವ್ಯವಸ್ಥೆಯನ್ನು ದೇವಸ್ಥಾನಗಳ ಮೂಲಕ ನೀಡಲು ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಸಜೀಪ ನಡು ಗ್ರಾಮದ ಕಂದಮ್ಮನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇಡೀ ಗ್ರಾಮದ ಮೇಲೆ ಜಿಲ್ಲಾಡಳಿತ ಕಣ್ಗಾವಲು ವ್ಯವಸ್ಥೆ ಮಾಡಿದೆ.
ಗ್ರಾಮದ 918 ಮನೆಗಳ ಮೇಲೆ ನಿಗಾ ಇಡಲಾಗಿದೆ.
ಅಲ್ಲಿನ ಗ್ರಾಮದ ಜನರ ದಿನನಿತ್ಯದ ಪರೀಕ್ಷೆಗಳಿಗೆ ಆರೋಗ್ಯ ಇಲಾಖೆಯ ಮೂಲಕ ಮಾಡಲಾಗುತ್ತಿದೆ.
ಆಶಾ ಕಾರ್ಯಕರ್ತೆ ಯರು ಮನೆಮನೆಗೆ ಬೇಟಿ ನೀಡಿ ನಿತ್ಯದ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ.
ಹೊಸಪ್ರಕರಣಗಳು ಏನಾದರೂ ಇದೆಯಾ ಈ ಬಗ್ಗೆ ಯೂ ದಿನ ಪರೀಕ್ಷೆ ಗಳು ನಡೆಯುತ್ತಿದೆ.
ಮಗು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.ಮಗುವಿನ ಆರೋಗ್ಯ ಸ್ಥಿರವಾಗಿದೆ.
ಗ್ರಾಮದ ಮನೆಗಳಿಗೆ ನಿತ್ಯದ ದಿನಸಿ ಸಹಿತ ಇತರೆ ಸಾಮಾಗ್ರಿಗಳನ್ನು ಸ್ಥಳೀಯ ಪಂಚಾಯತ್ ಮುಖೇನ ಒದಗಿಸುವ ಕೆಲಸ ತಾಲೂಕು ಆಡಳಿತದಿಂದ ನಡೆಯುತ್ತಿದೆ.
ಪತ್ರಿಕಾಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು , ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ ಉಪಸ್ಥಿತರಿದ್ದರು












