ಬಂಟ್ವಾಳ: ಕಾಲಮಿತಿಯೊಳಗೆ ತ್ವರಿತವಾಗಿ ಗುಣಮಟ್ಟದ ಕಾಮಗಾರಿಗಳನ್ನು ಮಾಡುವಂತೆ ಶಾಸಕರು ಸಭೆಯಲ್ಲಿ ತಿಳಿಸಿದರು.
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಳೆಯಿಂದ ಹಾನಿಯಾದ ಕಟ್ಟಡಗಳ ರಿಪೇರಿಗೆ ಅನುದಾನ ಬಿಡುಗಡೆಯಾಗಿದ್ದು, ಇದರ ಪರಿಶೀಲನೆಗಾಗಿ ಪಿಡಿಒ, ಶಾಲಾ ಮುಖ್ಯೋಪಾಧ್ಯಾಯರುಗಳು, ಸಿ.ಆರ್.ಪಿ.ಗಳಿಗೆ ಶಾಸಕರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ತಾ.ಪಂ.ನ. ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಿತು.

ಅಧಿಕಾರಿಗಳು ವಿಶೇಷ ಮುತುವರ್ಜಿಯಿಂದ ಕೆಲಸ ಮಾಡುವಂತೆ ಅವರು ಈ ಸಭೆಯಲ್ಲಿ ತಿಳಿಸಿದರು. 47 ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಒಟ್ಟು 252.50 ಹಾಗೂ 12 ಪ್ರೌಢಶಾಲಾ ಕೊಠಡಿಗಳ ರಿಪೇರಿಗೆ 136.50 ಕೋಟಿ ರೂ. ಬಿಡುಗಡೆಯಾಗಿದ್ದು, ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಯಬೇಕಾದ ಅವಶ್ಯಕತೆ ಇರುವುದರಿಂದ ಎಲ್ಲರ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ಕೆಲಸ ಮಾಡಿ ಎಂದರು.
ವೇದಿಕೆಯಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾ.ಪಂ. ಇ.ಒ.ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಎ.ಇ.ಇ. ತಾರನಾಥ್ ಸಾಲಿಯಾನ್ ಉಪಸ್ಥಿತರಿದ್ದರು.