ನವದೆಹಲಿ: ದೆಹಲಿಯಲ್ಲಿ ವರ್ಚ್ಯುವಲ್ ಸಮಾವೇಶದ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶದ ಒಟ್ಟು 47 ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಪ್ರಶಸ್ತಿ ವಿಜೇತ 47 ಶಿಕ್ಷಕರಲ್ಲಿ 18 ಮಂದಿ ಮಹಿಳೆಯರು. ಇದರಲ್ಲಿ ಕರ್ನಾಟಕದ ಇಬ್ಬರು ಶಿಕ್ಷಕರಿದ್ದಾರೆ. ಬೆಳ್ತಂಗಡಿ ತಾಲೂಕಿನ ನಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್, ಕಲಬುರಗಿಯ ಅಪ್ಜಲ್ಪುರದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್ ಎಂಬ ಶಿಕ್ಷಕರು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಅನನ್ಯ ಕೊಡುಗೆಯನ್ನು ಗುರುತಿಸಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಈ ಬಗ್ಗೆ ಟ್ವೀಟ್ ಮಾಡಿದ ರಾಷ್ಟ್ರಪತಿ, ನಾನು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸುತ್ತೇನೆ. ಮಕ್ಕಳ ಶಿಕ್ಷಣದಲ್ಲಿ ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಬದ್ಧತೆಯನ್ನು ಪ್ರಶಂಸಿಸುತ್ತೇನೆ. ನಮ್ಮ ದೇಶದ ಶಿಕ್ಷಕ ಸಮುದಾಯದ ಎಲ್ಲ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.














