ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು, ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.


ನಿನ್ನೆಯಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಅವರು ಹಂಗಾಮಿ ಸ್ಪೀಕರ್ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದರು. ಹಂಗಾಮಿಯಾಗಿ ಅಧಿಕಾರ ಸ್ವೀಕರಿಸೋ ಮುನ್ನ ಈ ಹುದ್ದೆ ಬಹಳ ದೊಡ್ಡದು ನನಗೆ ಬೇಡ. ನನಗೆ ಸಚಿವ ಸ್ಥಾನ ನೀಡಬೇಕೆಂದು ಆರ್.ವಿ ದೇಶಪಾಂಡೆ ಅವರು ಒತ್ತಾಯ ಮಾಡಿದ್ದರು ಎನ್ನಲಾಗಿದೆ. ದೇಶಪಾಂಡೆ ಅವರು ಸ್ಪೀಕರ್ ಹುದ್ದೆಗೆ ಒಪ್ಪದ ಹಿನ್ನೆಲೆಯಲ್ಲಿ ಕೈ ನಾಯಕರು UT ಖಾದರ್ ಅವರ ಮನವೊಲಿಸೋ ಪ್ರಯತ್ನ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಿನ್ನೆ ಮಧ್ಯರಾತ್ರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದರು. ಈ ಸಭೆಯಲ್ಲಿ ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ಅವರನ್ನೇ ಆಯ್ಕೆ ಮಾಡಲಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅಲ್ಪಸಂಖ್ಯಾತರೊಬ್ಬರು ಸ್ಪೀಕರ್ ಸ್ಥಾನ ಅಲಂಕರಿಸಿದ ಕೀರ್ತಿ ಯು.ಟಿ ಖಾದರ್ ಅವರಿಗೆ ಸಿಗಲಿದೆ.
ಇಂದು ಬೆಳಗ್ಗೆ 11 ಗಂಟೆಗೆ ಸಭಾಧ್ಯಕ್ಷ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಸಲಿದ್ದಾರೆ. ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಮೇ ನಾಳೆ ಮೇ.24 ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ.












