ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 1989 ರಲ್ಲಿ ದೇಶದಲ್ಲಿಯೇ ಪ್ರಥಮವಾಗಿ ಉಜಿರೆಯಲ್ಲಿ ಪ್ರಾರಂಭಗೊಂಡ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಇಂದಿನಿಂದ (ಶುಕ್ರವಾರ) ಎರಡು ದಿನ ಸ್ಥೂಲಕಾಯದಿಂದ ಬರುವ ಹೃದಯ ಸಂಬಂಧಿ ಹಾಗೂ ಮಧುಮೇಹ ರೋಗಗಳಲ್ಲಿ ಜೀವನ ಶೈಲಿಯ ಪಾತ್ರ ಎಂಬ ವಿಷಯದಲ್ಲಿ ಎರಡನೇ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಕಾಲೇಜಿಗೆ ಉತ್ಕೃಷ್ಟತಾ ಕೇಂದ್ರವಾಗಿ ಮಾನ್ಯತೆ ನೀಡಿದ್ದು ಪ್ರತಿ ವರ್ಷ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿ ಸಂಶೋಧಕರು ಹಾಗೂ ತಜ್ಞರಿಂದ ಪ್ರಬಂಧಗಳನ್ನು ಮಂಡಿಸಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಬಗ್ಗೆ ಜನರಲ್ಲಿ ಅರಿವು, ಜಾಗೃತಿ ಮೂಡಿಸಲಾಗುತ್ತದೆ.
ಸಂಶೋಧನೆಯ ಮೂಲಕ ಪ್ರಚಾರ ಮಾಡಿದಾಗ ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಗೆ ಜನರಿಗೆ ಅದರ, ವಿಶ್ವಾಸ ಮೂಡಿ ಬರುತ್ತದೆ ಎಂಬ ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಇಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ಕೊಡಲಾಗುತ್ತದೆ.
ದೇಶ-ವಿದೇಶಗಳಿಂದ 32 ವಿಶ್ವವಿದ್ಯಾಲಯಗಳಿಂದ ಒಂದು ಸಾವಿರಕ್ಕೂ ಮಿಕ್ಕಿ ಪ್ರತಿನಿಧಿಗಳು ಭಾಗವಹಿಸಲಿದ್ದು ಸಿದ್ಧತೆಗಳು ಪೂರ್ಣಗೊಂಡಿವೆ.
ಕಾಲೇಜು ಕಟ್ಟಡ ಹಾಗೂ ಪರಿಸರವನ್ನು ಆಕರ್ಷಕ ವಿನ್ಯಾಸದಿಂದ ಸಿಂಗರಿಸಿದ್ದು ಕಣ್ಮನ ಸೆಳೆಯುತ್ತಿದೆ. ಶುಕ್ರವಾರ ಬೆಳಿಗ್ಗೆ ಹತ್ತು ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ವಿಚಾರ ಸಂಕಿರಣವನ್ನು ಉದ್ಘಾಟಿಸುವರು. ಧರ್ಮಸ್ಥಳದ ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.














