ನವದೆಹಲಿ: ಪ್ರಸ್ತುತ ಈ ಲಾಕ್ ಡೌನ್ ಪರಿಸ್ಥಿತಿಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಿಕ್ಕಿಹಾಕಿಕೊಂಡಿರುವಂತಹ ವಲಸೆ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರು ಕೃಷಿ ಕೆಲಸಕ್ಕಾಗಿ ತಮ್ಮ ಗ್ರಾಮಗಳಿಗೆ ಹಿಂತಿರುಗಲು ಅಥವಾ ನಿರ್ಮಾಣ ಮತ್ತು ಇತರ ಕೆಲಸಗಳಿಗಾಗಿ ನಗರಗಳಿಗೆ ಹೋಗಲು ಬಯಸುತ್ತಿದ್ದಾರೆ. ಕೇಂದ್ರ ಸರ್ಕಾರದ ಮಂತ್ರಲಯವು ಏ.19 ರಂದು ಜಾರಿ ಮಾಡಿರುವಂತಹ ಆದೇಶದಂತೆ ವಲಸೆ ಕಾರ್ಮಿಕರನ್ನು ಹಾಗೂ ಕೂಲಿ ಕಾರ್ಮಿಕರನ್ನು ರಾಜ್ಯದೊಳಗೆ ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಸಾಮಾನ್ಯ ಕೃಷಿ ಮತ್ತು ಆರ್ಥಿಕ ಚಟುವಟಿಕೆಗಳು ಪುನರಾರಂಭಗೊಳ್ಳುತ್ತದೆ.
ಏ.19ರ ಆದೇಶದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೋಟೋಕಾಲ್ ರಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಕೆ.ಎಸ್.ಆರ್.ಟಿ.ಸಿ. ಬಸ್ಸುಗಳನ್ನು ಉಪಯೋಗಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು, ಪ್ರತಿ ಬಸ್ಸುಗಳಲ್ಲಿ ಶೇ.40 ರಷ್ಟು ಕಾರ್ಮಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಮಾಡಿಕೊಡಬೇಕು. ಸ್ಥಳಾಂತರಿಸುವ ವಲಸೆ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಮಾಸ್ಕ್ ಗಳನ್ನು ಹಾಗೂ ಗ್ಲೋವ್ಸ್ ಗಳನ್ನು ಹಾಕಬೇಕು ಎಂದು ಹೇಳಿ, ಕೂಡಲೇ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಲಿ ಎಂದು ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಹೇಳಿದ್ದಾರೆ.














